ಆಪ್ತ ನ್ಯೂಸ್ ಶಿರಸಿ:
ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮೀತಿಯ ವಿಶೇಷ ಸಭೆ ಶಿರಸಿಯ ಪೂಗಭವನದಲ್ಲಿ ನಡೆಯಿತು. ಸ್ವರ್ಣವಲ್ಲೀ ಶ್ರೀಗಳು ಶಿರಸಿ ನಗರ ಹಾಗೂ ೩ ತಾಲೂಕುಗಳ ಸಮೀತಿ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿದರು. ತನು-ಮನ-ಧನ-ಜನರ ಜೊತೆ ಬೇಡ್ತಿ ಅಘನಾಶಿನಿ ಬೃಹತ್ ಜನಸಮಾವೇಶ ಯಶಸ್ವಿಗೊಳಿಸಲು ಕರೆನೀಡಿದರು.
ಸಂತರು, ನಿವೃತ್ತ ಲೋಕಾಯುಕ್ತ ಜಸ್ಟಿಸ್ ಸಂತೋಷ ಹೆಗಡೆ, ಜನಪ್ರತಿನಿಧಿಗಳು, ಗಣ್ಯರು ತಜ್ಞರ ಪಾಲ್ಗೊಳ್ಳುವಿಕೆಯ ಸಮಾವೇಶದ ವ್ಯಾಪಕ ವ್ಯವಸ್ಥೆಗೆ ಶಿರಸಿ ನಗರದ ಗಣ್ಯರ ಸಂಚಲನಾ ಸಮೀತಿ ರಚಿಸಲಾಯಿತು.
ಬೇಡ್ತಿ ಸಮೀತಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಅಘನಾಶಿನಿ-ಬೇಡ್ತಿ-ಶಾಲ್ಮಲಾ-ಪಟ್ಟಣದ ಹೊಳೆ ಕಣಿವೆ ಉಳಿಸಿ ಚಳುವಳಿ ನಾಡಿನ ಎಲ್ಲೇಡೆ ಗಮನ ಸೆಳೆದಿದೆ. ಇದೀಗ ಜನೆವರಿ ೧೧ ರ ಸಮಾವೇಶದ ಧ್ವನಿ ದೆಹಲಿಗೂ ಕೇಳಿಸುವಂತೆ ಬೃಹತ್ ಜಾಗೃತಿ ಅಭಿಯಾನ ನಡೆಸಬೇಕು ಎಂದು ಕಣಿವೆಗಳ ಜನತೆಗೆ ಮನವಿ ಮಾಡಿದರು.
ಶಿರಸಿ ಹಾಗೂ ಸುತ್ತಲಿನ ಮಹಿಳಾ ಸಂಘ-ಸಂಸ್ಥೆಗಳ ಸಭೆಯನ್ನು ನಡೆಸಿ ಮನೆ ಮನೆಗೆ ಸಂದೇಶ ತಲುಪಿಸುತ್ತೇವೆ ಎಂದು ಸಮಿತಿಯ ಮಧುಮತಿ, ಭಾರತಿ, ಗೀತಾ, ಶೈಲಜಾ ತಿಳಿಸಿದರು.
ವಿವಿಧ ಜಾತಿ ಸಮುದಾಯಗಳ ಪ್ರಮುಖರ ಸಭೆಯನ್ನು ಡಿಸೆಂಬರ್ ೨೭ ರಂದು ಏರ್ಪಡಿಸಲು ನಿರ್ಧರಿಸಲಾಯಿತು. ಈ ಕುರಿತು ಶ್ರೀಧರ ಹಿರೇಹದ್ದ ಹರೀಶ ಪಂಡಿತ್, ಸುಧೀರ ಭಟ್, ಅರುಣ್ ಪ್ರಭು ಮುಂತಾದವರು ಜವಾಬ್ದಾರಿ ತೆಗೆದುಕೊಂಡರು.
ಟಿ.ಎಸ್.ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ, ಟಿ.ಎಂ.ಎಸ್ ಅಧ್ಯಕ್ಷ ಜಿಟಿ ಹೆಗಡೆ, ಎಂ ಈ ಎಸ್ ಅಧ್ಯಕ್ಷ ಜಿ.ಎಂ ಮುಳಖಂಡ ಸಹಕಾರ ಸಂಸ್ಥೆಗಳ ಬೆಂಬಲ ಪ್ರಕಟಿಸಿದರು.
ಸಿದ್ಧಾಪುರ ಟಿ.ಎಂ.ಎಸ್ ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೆಸರ ಡಿಸೆಂಬರ್ ೨೯ ರಂದು ಸಿದ್ಧಾಪುರದಲ್ಲಿ ಎಲ್ಲ ಸಹಕಾರಿಗಳ ಸಭೆ ನಡೆಸಲಿದ್ದೇವೆ ಎಂದರು. ನೆಲೆಮಾವು ಮಠದ ಅಧ್ಯಕ್ಷ ಜಿ.ಎಂ ಹೆಗಡೆ ಅವರು ಹೇರೂರು, ಹೆಗ್ಗರಣಿಯಲ್ಲಿ ತಯಾರಿ ಸಭೆಗಳು ನಡೆಯಲಿವೆ ಎಂದರು. ಗ್ರಾಮೀಣ ಪ್ರದೇಶದ ಮನೆ ಮನೆಗೆ ಕರಪತ್ರ ವಿತರಣೆ ಮಾಡಲಿದ್ದೇವೆ ಎಂದು ಗೋಪಾಲ ಕೃಷ್ಣ ತಂಗಾರಮನೆ ತಿಳಿಸದರು. ರತ್ನಾಕರ ಬಾಡಲಕೊಪ್ಪ ವಿವಿಧ ಧಾರ್ಮಿಕ ಮುಖಂಡರ ಭೇಟಿ ಮಾಡಿ ಆಹ್ವಾನ ನೀಡಿದ್ದೇವೆ ಎಂದು ತಿಳಿಸಿದರು.
ಕುಮಟಾದಲ್ಲಿ ಜನೆವರಿ ೧ ರಂದು ಅಘನಾಶಿನಿ ಜಾಗೃತಿ ಸಭೆ ನಡೆಸುವ ವಿಷಯವನ್ನು ಬಾಲಚಂದ್ರ ಸಾಯಿಮನೆ ಪ್ರಕಟಿಸಿದರು. ಅಂಕೋಲಾ ತಾ| ಕಲ್ಲೇಶ್ವರದಲ್ಲಿ ಸಭೆ ನಡೆಸುವ ಸಂಗತಿಯನ್ನು ನರಸಿಂಹ ಸಾತೊಡ್ಡಿ ತಿಳಿಸಿದರು. ಎಸಿ ಕಛೇರಿ, ಅರಣ್ಯ ಕಚೇರಿಗೆ ಸದ್ಯದಲ್ಲೆ ಬೇಡ್ತಿ ನಿಯೋಗ ಭೇಟಿ ನೀಡಲಿದೆ ಎಂದು ಎನ್ ಎಸ್ ಭಟ್ ಎಫ್ ಡಿ ಮಠ ತಿಳಿಸಿದರು.
ಡಾ| ಕೇಶವ ಕೊರ್ಸೆ, ಸುರೇಶ ಹಕ್ಕಿಮನೆ ತಂಡ ಸಾಮಾಜಿಕ ಮಾಧ್ಯಮದ ಮೂಲಕ ಬೇಡ್ತಿ-ಅಘನಾಶಿನಿ ಜಾಗೃತಿ ಮಾಡಲು ಜವಾಬ್ದಾರಿ ನೀಡಲಾಯಿತು.
ವಿಶ್ವೇಶ್ವರ ಭಟ್, ವೆಂಕಟೇಶ ನಾಯ್ಕ, ಶ್ರೀನಿವಾಸ್ ಹೆಬ್ಬಾರ್, ವಿಶ್ವನಾಥ ಶೀಗೇಹಳ್ಳಿ, ಅನಂತ ಮೂರ್ತಿ ಹೆಗಡೆ, ಉಪೇಂದ್ರ ಪೈ ಮುಂತಾದವರು ಸಂಚಾಲನಾ ಸಮೀತಿಯಲ್ಲಿ ಇದ್ದಾರೆ.
ಅಡಿಕೆ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಸತೀಶ ಭಟ್ ಪೂಜ್ಯ ಸ್ವರ್ಣವಲ್ಲೀ ಶ್ರೀಗಳನ್ನು ಸ್ವಾಗತಿಸಿದರು. ಶ್ಯಾಮಸುಂದರ ಭಟ್ ಪ್ರಾಸ್ತಾವಿಕ ಮಾಡಿದರು. ಲೋಕೇಶ್ ಹೆಗಡೆ ನಿರ್ವಹಿಸಿದರು. ಹುಳಗೋಳ ಅನಂತ ಧನ್ಯವಾದ ನೀಡಿದರು.