ಬೈಕ್-ಸ್ಕೂಟಿ ಡಿಕ್ಕಿ: ರಕ್ತದ ಮಡುವಿನಲ್ಲಿ ಬಿದ್ದ ಮಹಿಳೆ; ಅಜಾಗರೂಕ ಚಾಲನೆ ಆರೋಪದಡಿ ಬೈಕ್ ಸವಾರನ ವಿರುದ್ಧ ಪ್ರಕರಣ
ಆಪ್ತ ನ್ಯೂಸ್ ಕಾರವಾರ:
ನಗರದ ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್ಒ) ಕಚೇರಿ ಸಮೀಪ ಗುರುವಾರ ಬೆಳಿಗ್ಗೆ ಸಂಭವಿಸಿದ ಬೈಕ್-ಸ್ಕೂಟಿ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಬೈಕ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಈ ಸಂಬಂಧ ಬೈಕ್ ಸವಾರನ ವಿರುದ್ಧ ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಗೊಂಡ ಮಹಿಳೆಯನ್ನು ಶಿರವಾಡ ನಿವಾಸಿ ಹಾಗೂ ಗೂಡಂಗಡಿ ವ್ಯಾಪಾರಿಯಾಗಿರುವ ಮುಕ್ತದುಬಿ ದಾವುಲಸಾಬ ಚೋಪದಾರ (40) ಎಂದು ಗುರುತಿಸಲಾಗಿದೆ. ಇವರು ತಮ್ಮ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ, ಧಾರವಾಡ ಮೂಲದ ಹಾಗೂ ಸದ್ಯ ಹಬ್ಬುವಾಡದಲ್ಲಿ ವಾಸವಾಗಿರುವ ಸುರೇಂದ್ರ ಮುಕೇಶ ಲಮಾಣಿ (19) ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಸ್ಕೂಟಿ ಸವಾರ್ತಿ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಹಾಗೂ ಎಡ ಮೊಣಕಾಲಿಗೆ ಗಂಭೀರ ಗಾಯಗಳಾಗಿವೆ. ಬೈಕ್ ಸವಾರ ಸುರೇಂದ್ರ ಲಮಾಣಿಗೂ ಕಾಲಿಗೆ ಗಾಯಗಳಾಗಿದ್ದು, ಇಬ್ಬರೂ ಗಾಯಗೊಂಡಿದ್ದಾರೆ.
ರಕ್ತದ ಮಡುವಿನಲ್ಲಿ ಬಿದ್ದ ಮಹಿಳೆಗೆ ಸ್ಥಳೀಯರಿಂದ ತಕ್ಷಣ ನೆರವು
ಅಪಘಾತ ಸಂಭವಿಸಿದ ತಕ್ಷಣ ಮುಕ್ತದುಬಿ ಅವರು ರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ನೆರವಿಗೆ ಧಾವಿಸಿ ಸಂಚಾರ ನಿಯಂತ್ರಿಸುವ ಜೊತೆಗೆ ಪ್ರಾಥಮಿಕ ಚಿಕಿತ್ಸೆ ಒದಗಿಸಲು ಮುಂದಾದರು. ಘಟನೆಯ ಮಾಹಿತಿ ತಿಳಿದ ಕಾರವಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಕಲ್ಗುಟ್ಕರ್ ಸ್ಥಳಕ್ಕೆ ಆಗಮಿಸಿ ಗಾಯಾಳುವಿಗೆ ಅಗತ್ಯ ನೆರವು ನೀಡಿ, ಆಂಬುಲೆನ್ಸ್ ಮೂಲಕ ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದರು.
ಸ್ಥಳ ಪರಿಶೀಲಿಸಿದ ಪೊಲೀಸರು
ಮಾಹಿತಿ ಪಡೆದ ಕಾರವಾರ ನಗರ ಠಾಣೆ ಹಾಗೂ ಸಂಚಾರ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಾಥಮಿಕ ತನಿಖೆಯಲ್ಲಿ ಬೈಕ್ ಸವಾರನ ಅಜಾಗರೂಕ ಹಾಗೂ ನಿರ್ಲಕ್ಷ್ಯ ಚಾಲನೆಯಿಂದಲೇ ಅಪಘಾತ ಸಂಭವಿಸಿರುವುದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಬೈಕ್ ಸವಾರ ಸುರೇಂದ್ರ ಮುಕೇಶ ಲಮಾಣಿ ವಿರುದ್ಧ ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.
ಅಪಘಾತದ ಬಳಿಕ ಕೆಲಕಾಲ ಆ ಪ್ರದೇಶದಲ್ಲಿ ವಾಹನ ಸಂಚಾರ ನಿಧಾನಗೊಂಡಿದ್ದು, ಬಳಿಕ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ ಸಂಚಾರವನ್ನು ಸುಗಮಗೊಳಿಸಿದರು. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ, ವೇಗ ಮಿತಿಯೊಳಗೆ ವಾಹನ ಚಲಾಯಿಸುವಂತೆ ಸಾರ್ವಜನಿಕರಿಗೆ ಪೊಲೀಸರು ಮತ್ತೊಮ್ಮೆ ಮನವಿ ಮಾಡಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



