ಗೋಕರ್ಣದಲ್ಲಿ ಮಳೆಯ ಅವಾಂತರ; ಮಹಾಬಲೇಶ್ವರ ಸನ್ನಿಧಿಗೆ ನುಗ್ಗಿದ ಕೊಳಚೆ ನೀರು
ಆಪ್ತ ನ್ಯೂಸ್ ಗೋಕರ್ಣ:
ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಗೋಕರ್ಣದಲ್ಲಿ ಭಾನುವಾರ ಸುರಿದ ಭಾರೀ ಮಳೆ ಜನಜೀವನವನ್ನು ಸಂಪೂರ್ಣ ಅಸ್ತವ್ಯಸ್ತಗೊಳಿಸಿದೆ. ಕೆಲವೇ ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆಯಿಂದ ಪಟ್ಟಣದ ಹಲವು ಪ್ರದೇಶಗಳು ಜಲಾವೃತಗೊಂಡು, ರಸ್ತೆಗಳು ಕೆರೆಯಂತಾಗಿದ್ದು, ಸ್ಥಳೀಯರು ಹಾಗೂ ಪ್ರವಾಸಿಗರು ತೀವ್ರ ಸಂಕಷ್ಟ ಅನುಭವಿಸಿದರು.
ಗೋಕರ್ಣದ ಪ್ರಮುಖ ಭಾಗಗಳಾದ ಗಣಪತಿ ದೇವಸ್ಥಾನ, ರಥಬೀದಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚರಂಡಿ ನೀರು ಸರಾಗವಾಗಿ ಹರಿಯದ ಕಾರಣ ರಸ್ತೆಗಳ ಮೇಲೆ ನೀರು ನಿಂತು ಕೃತಕ ಪ್ರವಾಹದ ಸ್ಥಿತಿ ನಿರ್ಮಾಣವಾಯಿತು. ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದ್ದು, ಪಾದಚಾರಿಗಳು ನೀರಿನಲ್ಲೇ ಸಂಚರಿಸುವ ಪರಿಸ್ಥಿತಿ ಎದುರಾಯಿತು.
ಇದಕ್ಕೂ ಮಿಗಿಲಾಗಿ, ಭಾರೀ ಮಳೆಯ ಪರಿಣಾಮ ಗೋಕರ್ಣದ ವಿಶ್ವಪ್ರಸಿದ್ಧ ಮಹಾಬಲೇಶ್ವರ ದೇವಸ್ಥಾನಕ್ಕೂ ಕೊಳಚೆ ನೀರು ನುಗ್ಗಿರುವುದು ಭಕ್ತರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ದೇವಸ್ಥಾನದ ಆತ್ಮಲಿಂಗ ಸನ್ನಿಧಿವರೆಗೂ ನೀರು ತಲುಪಿದೆ ಎನ್ನಲಾಗುತ್ತಿದ್ದು, ಹಲವು ಗಂಟೆಗಳ ಕಾಲ ದೇವಾಲಯದ ಒಳಭಾಗದಲ್ಲಿ ನೀರು ನಿಂತಿದ್ದರಿಂದ ಭಕ್ತರ ದರ್ಶನಕ್ಕೂ ತೊಂದರೆ ಉಂಟಾಯಿತು.
ದೇವಾಲಯದೊಳಗೆ ಕೊಳಚೆ ನೀರು ನುಗ್ಗಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಕ್ತರು ಹಾಗೂ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಳೆಗಾಲ ಆರಂಭವಾಗುತ್ತಿದ್ದಂತೆಯೇ ಇಂತಹ ಪರಿಸ್ಥಿತಿ ಎದುರಾಗಿರುವುದರಿಂದ, ದೇವಸ್ಥಾನ ಸುತ್ತಮುತ್ತಲಿನ ಚರಂಡಿ ವ್ಯವಸ್ಥೆ ಮತ್ತು ಮಳೆ ನೀರು ಹರಿಸುವ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಕೇಳಿಬರುತ್ತಿವೆ.
ಮಳೆಯ ಅಬ್ಬರದಿಂದ ಪಟ್ಟಣದ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು, ಅಂಗಡಿ-ಮುಂಗಟ್ಟುಗಳಿಗೂ ನೀರು ನುಗ್ಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಪ್ರವಾಸಿಗರು ಹಾಗೂ ಭಕ್ತರು ಮಳೆ ನೀರಿನಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ದಿನನಿತ್ಯದ ಚಟುವಟಿಕೆಗಳಿಗೂ ಅಡಚಣೆ ಉಂಟಾಯಿತು.
ಸ್ಥಳೀಯ ನಿವಾಸಿಗಳು ಹಾಗೂ ಭಕ್ತರು, ಗೋಕರ್ಣದಂತಹ ಅಂತರರಾಷ್ಟ್ರೀಯ ಖ್ಯಾತಿಯ ಧಾರ್ಮಿಕ ಕ್ಷೇತ್ರದಲ್ಲಿ ಮಳೆ ಬಂದಾಗಲೆಲ್ಲ ಇದೇ ಸಮಸ್ಯೆ ಮರುಕಳಿಸುತ್ತಿದ್ದು, ಶಾಶ್ವತ ಪರಿಹಾರ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಮಳೆಗಾಲ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಚರಂಡಿ ವ್ಯವಸ್ಥೆಯನ್ನು ಸುಧಾರಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



