ಚಿತ್ರದುರ್ಗದಲ್ಲಿ ಭೀಕರ ರಸ್ತೆ ದುರಂತ : ಬಸ್–ಲಾರಿ ಮುಖಾಮುಖಿ ಡಿಕ್ಕಿ: 17ಕ್ಕೂ ಹೆಚ್ಚು ಮಂದಿ ಸಜೀವ ದಹನ

Dec 25, 2025 - 08:34
 0  183
ಚಿತ್ರದುರ್ಗದಲ್ಲಿ ಭೀಕರ ರಸ್ತೆ ದುರಂತ :  ಬಸ್–ಲಾರಿ ಮುಖಾಮುಖಿ ಡಿಕ್ಕಿ: 17ಕ್ಕೂ ಹೆಚ್ಚು ಮಂದಿ ಸಜೀವ ದಹನ

ಆಪ್ತ ನ್ಯೂಸ್‌ ಚಿತ್ರದುರ್ಗ | ಹಿರಿಯೂರು:

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಇಂದು ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಖಾಸಗಿ ಸ್ಲೀಪರ್ ಬಸ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಕನಿಷ್ಠ 17ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿ ಮೃತಪಟ್ಟಿದ್ದಾರೆ.

ಬೆಂಗಳೂರುದಿಂದ ಶಿವಮೊಗ್ಗ ಮಾರ್ಗವಾಗಿ ಗೋಕರ್ಣಕ್ಕೆ ತೆರಳುತ್ತಿದ್ದ ‘ಸೀಬರ್ಡ್’ ಖಾಸಗಿ ಬಸ್‌ನಲ್ಲಿ ಸುಮಾರು 32 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಬೆಳಗಿನ ಜಾವ ಸಂಭವಿಸಿದ ಈ ಅಪಘಾತದಲ್ಲಿ, ಲಾರಿಯೊಂದು ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಬಸ್‌ಗೆ ಗುದ್ದಿದ ಪರಿಣಾಮ ಬಸ್‌ಗೆ ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡಿದೆ.

ಅಪಘಾತದ ನಂತರ ಬೆಂಕಿ ವೇಗವಾಗಿ ಹರಡಿದ್ದು, ಬಸ್ ಸಂಪೂರ್ಣವಾಗಿ ಧಗಧಗನೆ ಉರಿದಿದೆ. ಕೆಲ ಪ್ರಯಾಣಿಕರು ತಕ್ಷಣ ಕಿಟಕಿ ಒಡೆದು ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಒಟ್ಟು 9 ಮಂದಿ ಗಾಯಾಳುಗಳನ್ನು ಹಿರಿಯೂರು ಮತ್ತು ಚಿತ್ರದುರ್ಗದ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.

ಅಧಿಕಾರಿಗಳ ಪ್ರಕಾರ, ಮೃತರ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು, ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್ ಸಿಬ್ಬಂದಿ ತಕ್ಷಣ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಬೆಂಕಿ ನಂದಿಸಲು ಹಲವು ಗಂಟೆಗಳ ಕಾಲ ಶ್ರಮಿಸಬೇಕಾಯಿತು.

ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲಾರಿ ಚಾಲಕನ ನಿರ್ಲಕ್ಷ್ಯ ಹಾಗೂ ಅತಿವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಈ ಭೀಕರ ದುರಂತದಿಂದ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಘಟನೆ ಸ್ಥಳದಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ಮೃತರ ಗುರುತು ಪತ್ತೆ ಕಾರ್ಯ ಮುಂದುವರಿದಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 0