ಬೇಡ್ತಿ–ವರದಾ, ಅಘನಾಶಿನಿ–ವೇದಾವತಿ ನದಿ ಜೋಡಣೆ ವಿರೋಧಿ ಹೋರಾಟಕ್ಕೆ ಗಣ್ಯರ ಬೆಂಬಲ
ಆಪ್ತ ನ್ಯೂಸ್ ಶಿರಸಿ:
ಬೇಡ್ತಿ–ವರದಾ ಹಾಗೂ ಅಘನಾಶಿನಿ–ವೇದಾವತಿ ನದಿ ಜೋಡಣೆ ಯೋಜನೆಗಳ ವಿರುದ್ಧ ನಡೆಯುತ್ತಿರುವ ಸಹಿ ಸಂಗ್ರಹ ಅಭಿಯಾನಕ್ಕೆ ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು ಬೆಂಬಲ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಹಿ ಸಂಗ್ರಹ ಅಭಿಯಾನದಲ್ಲಿ ಹಿರಿಯ ವೈದಿಕರಾದ ರಾಮಕೃಷ್ಣ ಭಟ್ಟ ಕೆರೆಕೈ, ಶಿರಸಿ ರೋಟರಿ ಕ್ಲಬ್ ಅಧ್ಯಕ್ಷರಾದ ಶ್ರೀಪತಿ ಹೆಗಡೆ ಹಾಗೂ ನಿವೃತ್ತ ಸಹ ಪ್ರಾಧ್ಯಾಪಕರಾದ ಸೂರ್ಯನಾರಾಯಣ ಎಸ್. ಭಟ್ ಅವರು ಸಕ್ರಿಯವಾಗಿ ಪಾಲ್ಗೊಂಡು ಸಹಿ ಮಾಡುವ ಮೂಲಕ ತಮ್ಮ ಬೆಂಬಲ ಸೂಚಿಸಿದರು.
ಪಶ್ಚಿಮಘಟ್ಟದ ಸೂಕ್ಷ್ಮ ಪರಿಸರ ವ್ಯವಸ್ಥೆ, ನದಿಗಳ ನೈಸರ್ಗಿಕ ಹರಿವು, ಜೀವವೈವಿಧ್ಯ ಹಾಗೂ ಸ್ಥಳೀಯ ಜನಜೀವನದ ಮೇಲೆ ನದಿ ತಿರುವು ಯೋಜನೆಗಳಿಂದ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಅಭಿಯಾನದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೇಡ್ತಿ–ವರದಾ ಹಾಗೂ ಅಘನಾಶಿನಿ–ವೇದಾವತಿ ನದಿ ಜೋಡಣೆ ಯೋಜನೆಗಳನ್ನು ಕೈಬಿಡಬೇಕು ಎಂದು ಹೋರಾಟಗಾರರು ಒತ್ತಾಯಿಸುತ್ತಿದ್ದಾರೆ.
ನದಿ ಹಾಗೂ ಪರಿಸರ ಸಂರಕ್ಷಣೆಯ ಪರ ನಡೆಯುತ್ತಿರುವ ಈ ಜನಾಂದೋಲನಕ್ಕೆ ವೈದ್ಯರು, ಶಿಕ್ಷಣ ಕ್ಷೇತ್ರದ ಹಿರಿಯರು, ವೈದಿಕರು, ಪರಿಸರಪ್ರೇಮಿಗಳು ಸೇರಿದಂತೆ ಸಮಾಜದ ವಿವಿಧ ವರ್ಗಗಳ ಗಣ್ಯರು ನಿರಂತರವಾಗಿ ಕೈಜೋಡಿಸುತ್ತಿದ್ದಾರೆ.
ರಾಮಕೃಷ್ಣ ಭಟ್ಟ ಕೆರೆಕೈ, ಶ್ರೀಪತಿ ಹೆಗಡೆ ಹಾಗೂ ಸೂರ್ಯನಾರಾಯಣ ಎಸ್. ಭಟ್ ಅವರ ಭಾಗವಹಿಸುವಿಕೆ ನದಿ ಸಂರಕ್ಷಣೆಯ ಹೋರಾಟಕ್ಕೆ ಮತ್ತಷ್ಟು ಬಲ ನೀಡಿದೆ ಎಂದು ಸಂಘಟಕರು ತಿಳಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0