ಶಿಡ್ಲಗುಂಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ಭೀಕರ ಅಪಘಾತ: 20ಕ್ಕೂ ಹೆಚ್ಚು ಮಂದಿಗೆ ಗಾಯ

Aug 27, 2026 - 09:12
 0  79
ಶಿಡ್ಲಗುಂಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ಭೀಕರ ಅಪಘಾತ: 20ಕ್ಕೂ ಹೆಚ್ಚು ಮಂದಿಗೆ ಗಾಯ

ಆಪ್ತ ನ್ಯೂಸ್ ಮುಂಡಗೋಡ:

ತಾಲೂಕಿನ ಶಿಡ್ಲಗುಂಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಬಸ್‌ ಚಾಲಕರೊಬ್ಬರ ಸ್ಥಿತಿ ಗಂಭೀರವಾಗಿದೆ.

ಬೆಂಗಳೂರು–ಯಲ್ಲಾಪುರ ಹಾಗೂ ಮುಂಡಗೋಡ–ಯಲ್ಲಾಪುರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಶಿಡ್ಲಗುಂಡಿ ಸಮೀಪ ಮುಖಾಮುಖಿಯಾಗಿ ಡಿಕ್ಕಿಯಾಗಿವೆ. ಡಿಕ್ಕಿಯ ರಭಸಕ್ಕೆ ಎರಡೂ ಬಸ್‌ಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಬೆಂಗಳೂರು–ಯಲ್ಲಾಪುರ ಮಾರ್ಗದ ಬಸ್‌ನ ಚಾಲಕ ಬಸ್‌ನೊಳಗೆ ಸಿಲುಕಿಕೊಂಡಿದ್ದರು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜೆಸಿಬಿ ತರಿಸಿ, ಬಸ್‌ನ ಮುಂಭಾಗವನ್ನು ತೆರವುಗೊಳಿಸಿ ಚಾಲಕನನ್ನು ಸುರಕ್ಷಿತವಾಗಿ ಹೊರತೆಗೆಯಲಾಯಿತು. ಅಪಘಾತದಲ್ಲಿ ಗಾಯಗೊಂಡ 20ಕ್ಕೂ ಹೆಚ್ಚು ಪ್ರಯಾಣಿಕರನ್ನು ತಕ್ಷಣ ಮುಂಡಗೋಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಅಪಘಾತದಲ್ಲಿ ಗಾಯಗೊಂಡವರನ್ನು ಐದು ಆಂಬ್ಯುಲೆನ್ಸ್‌ಗಳ ಮೂಲಕ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಗಂಭೀರವಾಗಿ ಗಾಯಗೊಂಡ ಆರು ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್‌ಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

ಅಪಘಾತದ ಪರಿಣಾಮ ರಾಜ್ಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಮುಂಡಗೋಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎರಡು ಬಸ್‌ಗಳು ಮುಖಾಮುಖಿಯಾಗಿ ಡಿಕ್ಕಿಯಾಗಲು ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಘಟನೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0